Nikhil Kumaraswamy: ತಮ್ಮ ರಾಜಕೀಯ ನಡೆ ಬಗ್ಗೆ ಬಹಿರಂಗ ಪತ್ರ ಬರೆದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಕಳೆದೊಂದು ವಾರದಿಂದ ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯ ಜೀವನದ ಬಗ್ಗೆ ಚರ್ಚೆ ನಡೀತಿದೆ. ಅದಕ್ಕೆ ಕಾರಣ ತಂದೆ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ನೀಡಿದ ಹೇಳಿಕೆ. ಇತ್ತೀಚೆಗೆ ಮಂಡ್ಯದಲ್ಲಿ ಮಾತನಾಡಿದ ಹೆಚ್ಡಿಕೆ "ಮುಂದಿನ 5 ವರ್ಷ ನಿಖಿಲ್ ಕುಮಾರಸ್ವಾಮಿಯನ್ನು ಚುನಾವಣೆಗೆ ಕರೆತರುವ ಪ್ರಶ್ನೆಯೇ ಇಲ್ಲ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ಆತನಿಗೆ ಹೇಳಿದ್ದೇನೆ" ಎಂದಿದ್ದರು.
"ಈಗಾಗಲೇ ನಿಖಿಲ್ 2 ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಕಳೆದ ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್ ತಲೆ ಕೊಟ್ಟ. ಸೋಲು, ಗೆಲವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ. ಜನಾಭಿಪ್ರಾಯಕ್ಕೆ ತಲೆ ಭಾಗಬೇಕು" ಎಂದು ಹೇಳಿದ್ದರು. ಅದಕ್ಕೂ ಮುನ್ನ ಇತ್ತೀಚೆಗೆ ನಡೆದ ನಿಖಿಲ್ ಹೊಸ ಸಿನಿಮಾ ಮುಹೂರ್ತ ಸಮಾರಂಭದಲ್ಲೂ ಇದೇ ರೀತಿಯಲ್ಲಿ ಹೆಚ್ಡಿಕೆ ಮಾತನಾಡಿದ್ದರು. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಸಂಪೂರ್ಣವಾಗಿ ರಾಜಕೀಯ ರಂಗ ತೊರೆಯುತ್ತಾರಾ? ಎನ್ನುವ ಪ್ರಶ್ನೆ ಎದ್ದಿತ್ತು.

ತಮ್ಮ ರಾಜಕೀಯ ಜೀವನದ ಬಗ್ಗೆ ನಡೆಯುತ್ತಿರುವ ಚರ್ಚೆ ಬಗ್ಗೆ ಇದೀಗ ಸ್ವತಃ ನಿಖಿಲ್ ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಹಿರಂಗ ಪತ್ರ ಬರೆದಿದ್ದಾರೆ. "ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ" ಎಂದಿದ್ದಾರೆ.
"ಆರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ.
ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ.
ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ.
ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ.
ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ.
ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ.
-ಇಂತಿ ನಿಮ್ಮ ನಿಖಿಲ್ ಕುಮಾರ್
'ಜಾಗ್ವಾರ್' ಸಿನಿಮಾ ಮೂಲಕ ನಿಖಿಲ್ ಚಿತ್ರರಂಗ ಪ್ರವೇಶಿಸಿದರು. ಬಳಿಕ 'ಸೀತಾರಾಮ ಕಲ್ಯಾಣ' ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡರು. 'ಕುರುಕ್ಷೇತ್ರ' ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿ ಮೋಡಿ ಮಾಡಿದ್ದರು. 'ರೈಡರ್' ನಿಖಿಲ್ ಕುಮಾರಸ್ವಾಮಿ ನಟಿಸಿದ ಕೊನೆಯ ಸಿನಿಮಾ. ಈ ನಡುವೆ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆ ಹಾಗೂ ರಾಮನಗರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರು. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಆದರೆ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
'ಯಧುವೀರ್' ಒಂದೆರಡು ಸಿನಿಮಾಗಳು ಘೋಷಣೆ ಆದರೂ ಸೆಟ್ಟೇರಲಿಲ್ಲ. ಕೊನೆಗೆ ಲೈಕಾ ಸಂಸ್ಥೆ ನಿರ್ಮಾಣದ ಚಿತ್ರಕ್ಕೆ ನಿಖಿಲ್ ಗ್ರೀನ್ ಸಿಗ್ನಲ್ ಕೊಟ್ಟರು. ಇತ್ತೀಚೆಗೆ ಖಾಸಗಿ ಹೋಟೆಲ್ನಲ್ಲಿ ಸಿನಿಮಾ ಮುಹೂರ್ತ ನೆರವೇರಿತು. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ತಮಿಳು ನಿರ್ದೇಶಕ ಲಕ್ಷ್ಮಣ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಇನ್ನು ಹೆಸರಿಡದ ಈ ಚಿತ್ರದಲ್ಲಿ ಯುಕ್ತಿ ತರೇಜ ನಾಯಕಿಯಾಗಿ ನಟಿಸುತ್ತಿದ್ದಾರೆ. ನಟ ಕೋಮಲ್ ಸಹ ಮುಖ್ಯವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಈ ಸಿನಿಮಾ ಮೂಡಿ ಬರಲಿದೆ.


Click it and Unblock the Notifications











