ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನು 4 ಜನ ಆರೋಪಿಗಳು ನಾಪತ್ತೆ
ದಿನದಿಂದ ದಿನಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣ ತೀವ್ರ ಸ್ಪರೂಪ ಪಡೆದುಕೊಳ್ಳುತ್ತಿದೆ. ಪ್ರಕರಣವನ್ನು ಬಗೆದಷ್ಟು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿದೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಂದಿರುವ ಆರೋಪದ ದರ್ಶನ್ ಮೇಲಿದೆ. ಈಗಾಗಲೇ ಪ್ರಕರಣ ಸಂಬಂಧ 13 ಜನ ಆರೋಪಿಗಳನ್ನು ಬಂಧಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಇಂದು(ಜೂನ್ 12) ಕೊಲೆ ನಡೆದ ಪಟ್ಟಣಗೆರೆ ಶೆಡ್ ಸ್ಥಳಕ್ಕೆ ಮಹಜರಿಗೂ ಕರೆದುಕೊಂಡು ಹೋಗಿದ್ದರು. ಅದಕ್ಕೂ ಮುನ್ನ ಆರೋಪಿಗಳ ಜೊತೆ ಶವ ಎಸೆದ ಜಾಗದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಂತೆ ಪೊಲೀಸ್ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು.

ಕೊಲೆ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದರು. 13 ಜನರು ಈಗಾಗಲೇ ಪೊಲೀಸರ ವಶದಲ್ಲಿದ್ದಾರೆ ಸದ್ಯದ ಮಾಹಿತಿ ಪ್ರಕಾರ ರೇಣುಕಾಸ್ವಾಮಿ ಅಪಹರಣ, ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನು ನಾಲ್ಕು ಜನ ನಾಪತ್ತೆ ಆಗಿದ್ದಾರೆ ಎಂದು ವರದಿಯಾಗಿದೆ. ಅನು, ಜಗ್ಗ, ರವಿ, ರಾಜು ಎಂಬ 4 ಜನರ ಹೆಸರು ಪ್ರಕರಣದಲ್ಲಿ ಕೇಳಿಬರುತ್ತಿದ್ದು ಅವರಿಗಾಗಿ ಪೊಲೀಸರು ಹುಡಕಾಟ ನಡೆಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್ ಎ2 ಆಗಿದ್ದಾರೆ. ಇನ್ನುಳಿದಂತೆ ವಿನಯ್, ರಾಘವೇಂದ್ರ, ಪವನ್, ಲಕ್ಷ್ಮಣ್, ನಾಗರಾಜ್, ಪ್ರದೋಶ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿ 13 ಜನ ಪೊಲೀಸರ ಕಸ್ಟಡಿಯಲ್ಲಿದ್ದು ತನಿಖೆ ಪ್ರಗತಿಯಲ್ಲಿದೆ. ಇನ್ನು ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ರೇಣುಕಾಸ್ವಾಮಿ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮಂಗಳವಾರ ರಾತ್ರಿ ಹುಟ್ಟೂರಲ್ಲಿ ರೇಣುಕಾಸ್ವಾಮಿ ಪಾರ್ಥೀವ ಶರೀರದ ಅಂತ್ಯಕ್ರಿಯೆ ನಡೆದಿತ್ತು. ವೀರಶೈವ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಿತು.
ಅತಿಯಾದ ಮೊಬೈಲ್ ಗೀಳಿನಿಂದ ರೇಣುಕಾಸ್ವಾಮಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿದೆ. ಸಂಬಂಧವೇ ಇಲ್ಲದವರಿಗೆ ಮೆಸೇಜ್ ಮಾಡಿ ಪ್ರಾಣಕ್ಕೆ ಕುತ್ತು ತಂದುಕೊಂಡಂತಾಗಿದೆ. ರೇಣುಕಾಸ್ವಾಮಿ ಪೋಷಕರು, ಪತ್ನಿ ಆಕ್ರಂದನ ಮುಗಿಲು ಮುಟ್ಟಿದೆ.
ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇನ್ನು ನಟ ದರ್ಶನ್ ಮೇಲಿನ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಸಾಧ್ಯತೆಯಿದೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ನಟ ದರ್ಶನ್ ಹೆಸರು ಕೇಳಿಬಂದಿತ್ತು.


Click it and Unblock the Notifications











