ಗಂಗಾವತಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಿದ ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುತ್ತಾರೆ. ಬಡವರ ಕಷ್ಟಕ್ಕೆ ನೆರವಾಗಿರುವ ಪುನೀತ್ ಇತ್ತೀಚಿಗೆ ಸರ್ಕಾರಿ ಶಾಲೆ ಅಭಿವೃದ್ಧಿಗೆ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ. ದೊಡ್ಮನೆ ನಟನ ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆ ಅಭಿವೃದ್ಧಿಗೆ ಪುನೀತ್ ರಾಜ್ ಕುಮಾರ್ 1 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರವನ್ನು ಸ್ವತಹ ಶಾಲೆಯೇ ಬಹಿರಂಗ ಪಡಿಸಿದೆ. ಪುನೀತ್ ಮತ್ತು ಜೇಮ್ಸ್ ಚಿತ್ರತಂಡಕ್ಕೆ ಅಭಿನಂದನಾ ಪತ್ರ ಬಿಡುಗಡೆ ಮಾಡಿ, ಧನ್ಯವಾದ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ಮತ್ತು ಶಾಲೆಯ ಕಲಿಕಾ ವಾತಾವರಣವನ್ನು ಉತ್ತೇಜಿಸಲು ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ 1 ಲಕ್ಷ ರೂಪಾಯಿಯನ್ನು ಪ್ರೋತ್ಸಾಹ ಧನವಾಗಿ ನೀಡಿದ್ದಾರೆ ಎಂದು ಬಹಿರಂಗಪಡಿಸಿದೆ.

ಅಂದ್ಹಾಗೆ ಪುನೀತ್ ರಾಜ್ ಕುಮಾರ್ ಸದ್ಯ ಜೇಮ್ಸ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣ ಕೊಪ್ಪಳ, ಬಳ್ಳಾರಿ, ಹೊಸಪೇಟೆಯಲ್ಲಿ ನಡೆಯುತ್ತಿದೆ. ಅಲ್ಲೇ ಚಿತ್ರೀಕರಣದಲ್ಲಿರುವ ಪುನೀತ್ ಸ್ಥಳಿಯ ಶಾಲೆಯ ಅಭಿವೃದ್ಧಿಯ ಬಗ್ಗೆಯೂ ಯೋಚಿಸಿ ಹಣಕಾಸಿನ ಸಹಾಯ ಮಾಡಿದ್ದಾರೆ. ಸದ್ಯದಲ್ಲೇ ಉತ್ತರ ಕರ್ನಾಟಕ ಭಾಗದ ಚಿತ್ರೀಕರಣ ಮುಗಿಸಿ ಪುನೀತ್ ಮತ್ತು ತಂಡ ಬೆಂಗಳೂರಿಗೆ ಆಗಮಿಸಲಿದ್ದಾರೆ.


Click it and Unblock the Notifications










