ಚಿತ್ರಮಂದಿರಕ್ಕೆ ಮಾತ್ರ ನಿರ್ಬಂಧ ಏಕೆ? ಅಖಾಡಕ್ಕಿಳಿದ ಪುನೀತ್ ರಾಜ್ ಕುಮಾರ್
ಚಿತ್ರಮಂದಿರಗಳ ಮೇಲಿನ ಶೇಕಡಾ 50 ರಷ್ಟು ನಿರ್ಬಂಧ ಮುಂದುವರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ರಾಜ್ಯ ಸರ್ಕಾರ ಒಪ್ಪಿಗೆ ನೀಡದಿರುವುದನ್ನು ಪ್ರಶ್ನಿಸಿದ್ದಾರೆ.
ಧ್ರುವ ಸರ್ಜಾ, ದುನಿಯಾ ವಿಜಯ್, ನಿರ್ದೇಶಕ ಪ್ರಶಾಂತ್ ನೀಲ್, ಸಿಂಪಲ್ ಸುನಿ, ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಹ ಟ್ವಿಟ್ಟರ್ನಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ''ಖಾಸಗಿ ಕಾರ್ಯಕ್ರಮಗಳು, ಪೂಜಾ ಸ್ಥಳಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ಸ್ಥಳಗಳು ಹೀಗೆ ಎಲ್ಲವೂ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿಸಿದಾಗ, ಚಿತ್ರಮಂದಿರಗಳು ಮಾತ್ರ ಏಕೆ ಮಾಡಬಾರದು!?'' ಎಂದಿದ್ದಾರೆ.

ಪುನೀತ್ ರಾಜ್ ಕುಮಾರ್ ಟ್ವೀಟ್ಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಸಹ ಈ ಕುರಿತು ಟ್ವೀಟ್ ಮಾಡಿ ''ಎಲ್ಲ ಸಾರ್ವಜನಿಕ ಸ್ಥಳಗಳು ಜನರಿಂದ ವ್ಯವಹರಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮತ್ತೊಮ್ಮೆ ಚಿತ್ರಮಂದಿರವನ್ನು 50% ಕ್ಕೆ ಸೀಮಿತಗೊಳಿಸಿದೆ. ಏಕೆ? ಸಿನಿಮಾ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!'' ಎಂದು ಅಸಮಾಧಾನ ತೋರಿದ್ದಾರೆ.


Click it and Unblock the Notifications











