ಬಾನಿಗೆ ಹಾರಲು ಸಿದ್ಧ ಮಿನುಗುತಾರೆ ಪುನೀತ್ ಉಪಗ್ರಹ: ಶ್ರೀಹರಿಕೋಟಾಕ್ಕೆ 1 ಸಾವಿರ ಮಕ್ಕಳು!
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿದ ದಿನದಿಂದ ಅಭಿಮಾನಿಗಳೇ ಒಂದಲ್ಲಾ ಒಂದು ಒಳ್ಳೆ ಕೆಲಸಕ್ಕೆ ಮುಂದಾಗಿದ್ದಾರೆ. ಅಪ್ಪು ಸಮಾಜಮುಖಿ ಕೆಲಸಗಳಿಗೆ ಪ್ರೇರಣೆ ಹೊಂದಿ ರಸ್ತೆಗಳಿಗೆ ಲೇಔಟ್ಗಳಿಗೆ ಕಾಲೋನಿಗಳಿಗೆ ಪವರ್ಸ್ಟಾರ್ ಹೆಸರನ್ನೇ ಇಡಲಾಗುತ್ತಿದೆ. ಈ ಮೂಲಕ ಪುನೀತ್ ರಾಜ್ಕುಮಾರ್ ಹೆಸರು ಸಾದಾ ನೆನಪಿನಲ್ಲಿ ಉಳಿಯುವಂತೆ ಮಾಡುತ್ತಿದ್ದಾರೆ.
ಈ ಮಧ್ಯೆ ಸರ್ಕಾರ ಕೂಡ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ವಿದ್ಯಾರ್ಥಿಗಳೇ ನಿರ್ಮಿಸಿರೋ ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ಈ ಉಪಗ್ರಹಕ್ಕೆ ಪುನೀತ್ ರಾಜ್ಕುಮಾರ್ ಉಪಗ್ರಹವೆಂದು ಹೆಸರು ಇಡಲಾಗಿದೆ. ಇದೇ ಉಪಗ್ರಹದ ಉಡಾವಣೆಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ 'ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಈ ವಿಷಯವನ್ನು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪುನೀತ್ ಉಪಗ್ರಹ ಯೋಜನೆಯ ಪ್ರಗತಿ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ "ಈ ಉಪಗ್ರಹ ಯೋಜನೆಯ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುತ್ತದೆ" ಎಂದು ತಿಳಿಸಿದ್ದಾರೆ.
ಸ್ಪರ್ಧೆಯ ಹಿನ್ನೆಲೆಯಲ್ಲಿ ಪ್ರೌಢಶಾಲಾ ಮಕ್ಕಳಿಗೆ ಆನ್ಲೈನ್ ರಸಪ್ರಶ್ನೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಸುಮಾರು 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೂಡ ಕೊಡಲಾಗಿದೆ.
ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಇದರಲ್ಲಿ ಬೆಂಗಳೂರುವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು 'ಕೆಜಿಎಸ್3 ಸ್ಯಾಟ್' ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ನೆನಪಿಗಾಗಿ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ.

ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಲದು. ಬದಲಿಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿಗಳ ಬಗ್ಗೆ ತಿಳಿದುಕೊಂಡು, ಸಂಭ್ರಮಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.


Click it and Unblock the Notifications











