ಚಂದನವನದ ಹಿರಿಯ ನಿರ್ದೇಶಕ ಜಿ.ಮೂರ್ತಿ ನಿಧನ
ಸ್ಯಾಂಡಲ್ ವುಡ್ ನ ಹಿರಿಯ ಕಲಾನಿರ್ದೇಶಕ, ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ಜಿ.ಮೂರ್ತಿ ಇಂದು (ಅ.24) ಮಧ್ಯಾಹ್ನ 1 ಗಂಟೆಗೆ ನಿಧನರಾಗಿದ್ದಾರೆ. 56 ವರ್ಷದ ಜಿ.ಮೂರ್ತಿ ಅವರಿಗೆ ಇಂದು ಬೆಳಗ್ಗೆ ಮನೆಯಲ್ಲಿ ಜಾರಿ ಬಿದ್ದು ತಲೆಗೆ ಪೆಟ್ಟಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೆ ಬ್ರೈನ್ ಹ್ಯಾಮರೇಜ್ ನಿಂದ ಇಹಲೋಕ ತ್ಯಜಿಸಿದ್ದಾರೆ.
ಜಿ.ಮೂರ್ತಿ ಹಿರಿಯ ಚಿತ್ರ ನಿರ್ದೇಶಕ ಜಿ.ವಿ.ಅಯ್ಯರ್ ಅವರ ನಿಕಟವರ್ತಿಯಾಗಿದ್ದರು. ಅಯ್ಯರ್ ಅವರ ಸಿನಿಮಾಗಳಿಗೆ ಕಲಾನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಪಿ.ಕೃಷ್ಣಮೂರ್ತಿ ಅವರ ಜೊತೆ ಸಹಾಯಕರಾಗಿ ಕೆಲಸ ಮಾಡುವ ಮೂಲಕ ಜಿ.ಮೂರ್ತಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಸ್ವಾತಂತ್ರ್ಯ ನಿರ್ದೇಶಕರಾಗಿ 80ಕ್ಕೂ ಹೆಚ್ಚು ಸಿನಿಮಾಗಳಿಗೆ ಕಲಾನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು.
ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರಗಳಿಗೂ ಕೆಲಸ ಮಾಡಿದ್ದಾರೆ. 'ಚಂದ್ರಚಕೋರಿ' ಮತ್ತು 'ಕುರುನಾಡು' ಚಿತ್ರಗಳ ಅತ್ಯುತ್ತಮ ಕಲಾನಿರ್ದೇಶನಕ್ಕಾಗಿ ಅವರಿಗೆ ಎರಡು ಬಾರಿ ರಾಜ್ಯಪ್ರಶಸ್ತಿ ಸಂದಿದೆ. 'ಕುರುನಾಡು' ಅವರ ನಿರ್ದೇಶನದ ಚಿತ್ರವೂ ಹೌದು.

ಜಿ.ಮೂರ್ತಿ ನಿರ್ದೇಶನದ 'ಶಂಕರ ಪುಣ್ಯಕೋಟಿ' ಚಿತ್ರಕ್ಕೆ ಮೂರನೇ ಅತ್ಯುತ್ತಮ ಚಿತ್ರ ರಾಜ್ಯಪ್ರಶಸ್ತಿ (2008-09) ಗೌರವ ಸಂದಿದೆ. ವೈಷ್ಣವಿ, ಹಳ್ಳಿಯ ಮಕ್ಕಳು, ಅರಳುವ ಹೂಗಳು, ಸಿದ್ದಗಂಗ, ಸುಗಂಧಿ ಸೇರಿದಂತೆ ಒಟ್ಟು ಎಂಟು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ನಟ ಶ್ರೀನಿವಾಸ ಪ್ರಭು ಅವರ ಜೊತೆಗೂಡಿ 'ಬಿಂಬ' ಸಿನಿಮಾ ನಿರ್ಮಿಸಿ, ನಿರ್ದೇಶಿಸಿದ್ದರು.
ಒಂದೇ ಶಾಟ್ ನಲ್ಲಿ ಒಬ್ಬನೇ ಕಲಾವಿದ ಅಭಿನಯಿಸಿದ್ದ ಜಗತ್ತಿನ ಮೊದಲ ಚಿತ್ರವಾಗಿ ಇದು ದಾಖಲಾಗಿದೆ. ಜಿ.ಮೂರ್ತಿ ನಿರ್ದೇಶನದ ಸಿನಿಮಾಗಳು ದೇಶ, ವಿದೇಶಗಳ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿವೆ. ಜಿ.ಮೂರ್ತಿ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ


Click it and Unblock the Notifications











