ಕಲಾವಿದ, ತಂತ್ರಜ್ಞರಿಗೆ ನೆರವು: ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಆಹ್ವಾನ
ಕೊರೊನಾ ವೈರಸ್ ಎರಡನೇ ಅಲೆ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಿತ್ರಮಂದಿರದ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪರಿಹಾರ ಧನ ಘೋಷಣೆ ಮಾಡಿತ್ತು. ಈ ಪರಿಹಾರ ಹಣ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಜೂನ್ 3 ರಂದು ಘೋಷಣೆ ಮಾಡಿದ್ದ ಆರ್ಥಿಕ ಪ್ಯಾಕೇಜ್ನಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆಯಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ಪರಿಹಾರ ಪ್ರಕಟಸಿದ್ದರು.
ಸರ್ಕಾರದ ಈ ನಿರ್ಧಾರದಿಂದಾಗಿ 22 ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು ಆರು ಕೋಟಿ ಅರವತ್ತು ಲಕ್ಷ ರೂ. ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್ ಹರ್ಷ ಅವರು ತಿಳಿಸಿದ್ದಾರೆ.

ಕಲಾವಿದರು, ತಂತ್ರಜ್ಞ ಹಾಗು ಕಾರ್ಮಿಕರು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.
- ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ.
- ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು.
- ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ.
- ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಿತ್ರಮಂದಿರದ ಮಾಲೀಕರ ಪತ್ರದೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
- ಆನ್ಲೈನ್ ಅರ್ಜಿಯು 2021ರ ಜುಲೈ 9ರವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಲಭ್ಯವಿದೆ. - ಆರ್ಥಿಕ ನೆರವಿನ ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ.

Recommended Video
ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 8904645529 ಅನ್ನು ಸಂಪರ್ಕಿಸಬಹುದು ಇಲ್ಲವೆ [email protected] ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.


Click it and Unblock the Notifications











