ಮುಖ್ಯಮಂತ್ರಿಗಳ ಜೊತೆ ಶಿವರಾಜ್ ಕುಮಾರ್ ದಂಪತಿ ಚರ್ಚೆ
ಬೆಂಗಳೂರು, ಆಗಸ್ಟ್ 05 : ಖ್ಯಾತ ನಟ ಡಾ.ಶಿವರಾಜ್ ಕುಮಾರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ಹಲವು ವಿಚಾರಗಳ ಕುರಿತು ಶಿವಣ್ಣ ಅವರು ಚರ್ಚೆ ನಡೆಸಿದ್ದಾರೆ.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಜೊತೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಸುಮಾರು ಅರ್ಧ ಗಂಟೆಗಳ ಕಾಲ ಶಿವಣ್ಣ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದರು.
ಮೈಸೂರಿನಲ್ಲಿ ದಿ.ಪಾರ್ವತಮ್ಮ ರಾಜ್ ಕುಮಾರ್ ಅವರು ನಡೆಸುತ್ತಿದ್ದ ಶಾಂತಿಧಾಮದ ಅಭಿವೃದ್ಧಿ ಮತ್ತು ಶಾಲೆಯೊಂದನ್ನು ತೆರೆಯುವ ಬಗ್ಗೆ ಶಿವರಾಜ್ ಕುಮಾರ್ ಅವರು ಚರ್ಚೆ ನಡೆಸಿದರು. ಎಂದು ತಿಳಿದುಬಂದಿದೆ.

ಕುಮಾರಸ್ವಾಮಿ ಅವರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಜ್ ಕುಮಾರ್ ಅವರು, 'ಲೋಕಸಭೆ ಉಪ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಅವರನ್ನು ಕಣಕ್ಕಿಳಿಸುವ ಕುರಿತು ತೀರ್ಮಾನ ಮಾಡಿಲ್ಲ' ಎಂದರು.
'ಗೀತಾ ಅವರು ಸ್ಪರ್ಧಿಸಬೇಕು, ಗೆಲುವು ಸಾಧಿಸಬೇಕು ಎಂಬುದು ದೇವರ ಇಚ್ಛೆ ಇದ್ದರೆ ಯಾರೂ ತಪ್ಪಿಸಲಾಗುವುದಿಲ್ಲ' ಎಂದರು. 'ಶಿವಮೊಗ್ಗದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ' ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದರು.
ಮಧು ಬಂಗಾರಪ್ಪ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಕುರಿತು ಮಾತನಾಡಿದ ಗೀತಾ ಶಿವರಾಜ್ ಕುಮಾರ್, 'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ನಿರ್ಧಾರವನ್ನು ತೆಗೆದುಕೊಂಡರೂ ಸ್ವಾಗತ' ಎಂದು ತಿಳಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಾ.ಶಿವರಾಜ್ ಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದರು.


Click it and Unblock the Notifications











