ಸಕಲ ಸರ್ಕಾರಿ ಗೌರವದೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ಎಸ್ ಪಿ ಬಿ ಅಂತ್ಯಕ್ರಿಯೆ
ಬಾರದ ಲೋಕಕ್ಕೆ ಪಯಣ ಬೆಳೆಸಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ ಇಂದು ನೆರವೇರಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಹೇಳಿದ್ದಾರೆ.
ರೆಡ್ ಹಿಲ್ಸ್ ಬಳಿ ಇರುವ ತಾಮರೈಪಾಕ್ಕಂನ ಎಸ್ ಪಿ ಬಿ ಅವರ ಪ್ರೀತಿಯ ತೋಟದ ಮನೆಯಲ್ಲಿ ಇಂದು 11ಗಂಟೆ ಸುಮಾರಿಗೆ ಅಂತಿಮ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಎಸ್ ಪಿ ಬಿ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನಡೆಯಲಿದ್ದು, ಹೈದರಾಬಾದ್ ನಿಂದ ಪುರೋಹಿತರ ತಂಡ ಚೆನ್ನೈನತ್ತ ಆಗಮಿಸುತ್ತಿದ್ದಾರಂತೆ.
ಫಾರ್ಮ್ ಹೌಸ್ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 500ಕ್ಕು ಹೆಚ್ಚು ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ. ದಕ್ಷಿಣ ಭಾರತದ ಸಿನಿಮಾ ಗಣ್ಯರು ಮತ್ತು ರಾಜಕೀಯ ಗಣ್ಯರು ಎಸ್ ಪಿ ಬಿ ಅಂತಿಮ ವಿಧಿವಿಧಾನದಲ್ಲಿ ಭಾಗಿಯಾಗಲಿದ್ದಾರೆ. ರಜನಿಕಾಂತ್, ಚಿರಂಜೀವಿ, ಕಮಲ್ ಹಾಸನ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

ಕಳೆದ ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರಾ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿನ್ನೆ (ಸೆಪ್ಟಂಬರ್ 25)ರಂದು ಮಧ್ಯಾಹ್ನ 1.04ಕ್ಕೆ ಕೊನೆಯುಸಿರೆಳೆದಿದ್ದಾರೆ. ಎಸ್ ಪಿ ಬಿ ಇನ್ನಿಲ್ಲ ಎನ್ನುವ ಸತ್ಯವನ್ನು ಕೋಟ್ಯಂತರ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆ ಸೇರಿದಂತೆ ಸುಮಾರು 16 ಭಾಷೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಎಸ್ಪಿಬಿ ಹಾಡಿದ್ದಾರೆ. ಅತಿ ಹೆಚ್ಚು ಹಾಡಿಗೆ ಧ್ವನಿಯಾಗಿದ್ದ ಎಸ್ಪಿಬಿ ಅವರು ಗಿನ್ನಿಸ್ ದಾಖಲೆಗೆ ಸಹ ಪಾತ್ರರಾಗಿದ್ದಾರೆ. ತಮ್ಮ ಗಾಯನಕ್ಕಾಗಿ ಆರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 25 ಬಾರಿ ಆಂಧ್ರ ಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳು ನೀಡುವ ರಾಜ್ಯ ಪ್ರಶಸ್ತಿಗಳು ಸಹ ಪಡೆದಿದ್ದಾರೆ. ಚಿತ್ರರಂಗದಲ್ಲಿ ಎಸ್ಪಿಬಿ ಅವರ ಕೊಡುಗೆಗೆ ಗೌರವಿಸಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಸಹ ಲಭಿಸಿದೆ.


Click it and Unblock the Notifications











