ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸುಧಾರಾಣಿ, ಶ್ರುತಿ, ಮಾಳವಿಕಾ
ಇತ್ತೀಚಿಗಷ್ಟೆ ಬಚ್ಚಲು ಮನೆಯಲ್ಲಿ ಕಾಲು ಜಾರಿಬಿದ್ದು ಸೊಂಟ ಮತ್ತು ಕಾಲಿಗೆ ಪೆಟ್ಟು ಮಾಡಿಕೊಂಡಿರುವ ಹಿರಿಯ ನಟಿ ಲೀಲಾವತಿ ಅವರನ್ನು ನಟಿಯರಾದ ಶ್ರುತಿ, ಮಾಳವಿಕಾ ಮತ್ತು ಸುಧಾರಾಣಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಲೀಲಾವತಿಯವರ ನೆಲಮಂಗಳ ನಿವಾಸಕ್ಕೆ ಭೇಟಿ ನೀಡಿದ್ದ ನಟಿಮಣಿಯರು ಲೀಲಾವತಿ ಅವರ ಮನೆಯಲ್ಲಿ ಕೆಲ ಸಮಯ ಕಾಲ ಕಳೆದು ಅವರ ಜೊತೆ ಮಾತು ಕತೆ ನಡೆಸಿದ್ದಾರೆ.
Recommended Video
ಇತ್ತೀಚಿಗಷ್ಟೆ ಲೀಲಾವತಿ ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರನ್ನು ನೆಲಮಂಗಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪುತ್ರ ವಿನೋದ್ ರಾಜ್ ಜೊತೆ ಆಸ್ಪತ್ರೆಗೆ ತೆರಳಿದ್ದ ಲೀಲಾವತಿ ಚಿಕಿತ್ಸೆ ನೀಡಿದ ವೈದ್ಯರು ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ್ದ ಪುತ್ರ ವಿನೋದ್ ರಾಜ್ ಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಅರ್ಧ-ಮುಕ್ಕಾಲು ಗಂಟೆ ಒದ್ದಾಡಿದ್ದಾರೆ. ಜೋರಾಗಿ ಕೂಗಿ ಯಾರನ್ನಾದರೂ ಕರೆಯಲೂ ಸಾಧ್ಯವಾಗಿಲ್ಲ. ಬಚ್ಚಲ ಮನೆಯಲ್ಲೇ ನೆರಳಾಗಿದ್ದಾರೆ. ಬಳಿಕ ನಿಧಾನವಾಗಿ ಬಾಗಿಲು ತೆಗೆದು ಹೊರಬಂದಿದ್ದಾರೆ ಎಂದು ಎಂದು ಹೇಳಿದ್ದರು.

ಲೀಲಾವತಿ ಅವರು ಅನಾರೋಗ್ಯದ ವಿಚಾರ ತಿಳಿದ ತಕ್ಷಣ ಹಿರಿಯ ನಟಿಯರು ಮನೆಗೆ ತೆರಳಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ನಟಿ ಸುಧಾರಾಣಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದು, ಲೀಲಾವತಿ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದಾರೆ.
"ಲೀಲಾವತಿ ಅಮ್ಮ, ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಕಲಾವಿದೆ ಇವರು. ನೂರಾರು ಸಿನಿಮಾಗಳಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳ ಮೂಲಕ ನಮ್ಮೆಲ್ಲರನ್ನು ರಂಜಿಸಿದ್ದಾರೆ. ಲೀಲಾವತಿ ಎನ್ನುವುದು ದುರ್ಗಾದೇವಿಯ ಮತ್ತೊಂದು ಹೆಸರು, ಕನ್ನಡದಲ್ಲಿ ಲೀಲಾ ಎನ್ನುವ ಪದಕ್ಕೆ ಮತ್ತೊಂದು ಅರ್ಥ ವಿನೋದ. ಲೀಲಾವತಿ ಅಮ್ಮ ದುರ್ಗೆಯ ಅವತಾರವಾದರು, ಜೀವನದ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಇಂದು ಎಲ್ಲಾ ಹೆಣ್ಣುಮಕ್ಕಳಿಗೆ ಮಾದರಿಯಾಗಿ ನಿಂತಿದ್ದಾರೆ" ಎಂದು ಸುಧಾರಾಣಿ ಬರೆದುಕೊಂಡಿದ್ದಾರೆ.

"ಅವರು ವಾಸವಿರುವ ಊರಿನಲ್ಲಿ ಬಡಜನರಿಗಾಗಿ ಆಸ್ಪತ್ರೆ ಕಟ್ಟಿಸಿದ್ದಾರೆ, ಹಸು ಕರುಗಳಿಗೆ ನೀರಿನ ಟ್ಯಾಂಕ್ ಕಟ್ಟಿಸಿ ಅವುಗಳಿಗೆ ಮೇವು ನೀಡಿದ್ದಾರೆ, ಎಷ್ಟೋ ಜನರಿಗೆ ಊಟ ನೀಡಿ ಸಹಾಯ ಮಾಡುತ್ತಾ ಇರುವ ಇವರನ್ನು ಅನ್ನಪೂರ್ಣೇಶ್ವರಿಯ ಸ್ವರೂಪ ಎಂದು ಕರೆಯುವುದೋ ಅಥವಾ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದೆಲ್ಲವನ್ನು ಭೂಮಿ ತಾಯಿಯ ಹಾಗೆ ತನ್ನಲ್ಲಿಯೇ ಹೊತ್ತು, ತಾಳ್ಮೆಯಿಂದ ಎಲ್ಲವನ್ನು ಸಹಿಸಿ, ಲೀಲಾಜಾಲವಾಗಿ ನಿಭಾಯಿಸಿರವ ಇವರನ್ನು ಭೂಮಿ ತಾಯಿಯ ಸ್ವರೂಪ ಎಂದು ಕರೆಯುವುದೋ. ಇಂತಹ ವ್ಯಕ್ತಿತ್ವ ಹೊಂದಿರುವ ಲೀಲಾವತಿ ಅಮ್ಮನವರ ಜೊತೆ ಬಾಲನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶ ನನಗೆ ಸಿಕ್ಕಿತ್ತು" ಎಂದು ಸುಧಾರಾಣಿ ಹೇಳಿದ್ದಾರೆ.
"ನಾಯಕಿಯಾದ ಮೇಲು ಲೀಲಾವತಿ ಅಮ್ಮನವರ ಜೊತೆ ಸುಮಾರು ಸಿನಿಮಾಗಳಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟ. ಇಲ್ಲಿರುವ ಎರಡು ಫೋಟೋಗಳಲ್ಲಿ ಮೊದಲನೆಯದು ನಾನು ಬಾಲನಟಿಯಾಗಿ ನಟಿಸಿದ ಮೊದಲ ಸಿನಿಮಾ "ಕಿಲಾಡಿ ಕಿಟ್ಟು" ಚಿತ್ರೀಕರಣದ ಸಮಯದ ಫೋಟೋ ಮತ್ತೊಂದು ಇಂದು ಲೀಲಾವತಿ ಅಮ್ಮನವರನ್ನು ಭೇಟಿ ಮಾಡಿದ ಸಂದರ್ಭದ ಫೋಟೋ..ವರ್ಷಗಳು ಉರುಳಿವೆ ಹೊರತು ನಮ್ಮ ನಡುವೆ ಇರುವ ಬಾಂಧವ್ಯವಲ್ಲ" ಎಂದು ಬರೆದುಕೊಂಡಿದ್ದಾರೆ.

ನಟಿ ಲೀಲಾವತಿ ಅವರಿಗೆ 83 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದಾರೆ. ನಟಿ ಲೀಲಾವತಿ ಕನ್ನಡ ಸೇರಿದಂತೆ ತಮಿಳು, ಮಲಯಾಳಂ ಮತ್ತು ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಾಂಗಲ್ಯ ಯೋಗ ಸಿನಿಮಾ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟ ಲೀಲಾವತಿ ಅನೇಕ ಅದ್ಭುತ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ, ಪೋಷಕ ನಟಿಯಾಗಿ 3 ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರಾಭಿಮಾನಿಗಳನ್ನು ರಂಜಿಸಿದ್ದಾರೆ.
ಲೀಲಾವತಿ ಸದ್ಯ ಬಣ್ಣ ಹಚ್ಚದೆ ವರ್ಷಗಳಾಗಿವೆ ಆಗಿದೆ. 2009ರಲ್ಲಿ ಲೀಲಾವತಿ ಕೊನೆಯದಾಗಿ ಯಾರದು ಎನ್ನುವ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಪುತ್ರ ವಿನೋದ್ ರಾಜ್ ಜೊತೆ ಕಾಣಿಸಿಕೊಂಡಿದ್ದರು. ಈ ಸಿನಿಮಾ ಬಳಿಕ ಮತ್ತೆ ತೆರೆಮೇಲೆ ಬಂದಿಲ್ಲ. ನಟನೆಯ ಜೊತೆಗೆ ಕೆಲವು ಸಿನಿಮಾಗಳನ್ನು ನಿರ್ಮಾಣ ಸಹ ಮಾಡಿದ್ದಾರೆ. ಸದ್ಯ ಪುತ್ರ ವಿನೋದ್ ರಾಜ್ ಜೊತೆ ವಾಸಿಸುತ್ತಿದ್ದಾರೆ.


Click it and Unblock the Notifications











