ಮತ್ತೆ ಜೈಲಿನತ್ತ ಹೊರಟ ನಟ ದರ್ಶನ್; ನಟಿ ರಮ್ಯಾ ಹೇಳಿದ್ದೇನು?
ರೇಣುಕಾಸ್ವಾಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ 7 ಮಂದಿ ಆರೋಪಿಗಳ ಜಾಮೀನು ರದ್ದು ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚಿಸಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಟಿ ರಮ್ಯಾ ಈ ಬಗ್ಗೆ ಪ್ರತಿಕ್ರಿಯಿಸಿ ಪೋಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಕಳೆದ ವರ್ಷ ದರ್ಶನ್ ಸೇರಿ 15 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದ್ದರು. ಬಳಿಕ ಮಧ್ಯಂತರ ಜಾಮೀನು ಪಡೆದು ದರ್ಶನ್ ಹೊರ ಬಂದಿದ್ದರು. ನಂತರ ಎಲ್ಲಾ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಆದರೆ ಈ ಜಾಮೀನು ರದ್ದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿಸಿ ಸುಪ್ರೀಂ ಇದೀಗ ಆದೇಶ ಹೊರಡಿಸಿದೆ.

"ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ - ಕಾನೂನಿನ ಮುಂದೆ ಎಲ್ಲರೂ ಸಮಾನರು. ಒಂದು ವಿಚಾರ ಹೇಳಲು ಬಯಸುತ್ತೇನೆ. ಸರಿಯಾದ ರೀತಿಯಲ್ಲಿ ನಡೆಯಿರಿ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ನ್ಯಾ ಸಿಗುವುದು ತಡವಾಗಬಹುದು ಮತ್ತು ಕಠಿಣ ಎನಿಸಬಹುದು. ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇದೆ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ" ಎಂದು ರಮ್ಯಾ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ನಟಿ ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ವಾರ್ ತಾರಕಕ್ಕೇರಿತ್ತು. ಈ ವೇಳೆ ನೇರವಾಗಿ ದರ್ಶನ್ ಬಗ್ಗೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದರು. ತಮ್ಮ ಅಭಿಮಾನಿಗಳಿಗೆ ದರ್ಶನ್ ಬುದ್ದಿ ಹೇಳಬೇಕು ಎಂದಿದ್ದರು. ಇನ್ನು ತಮಗೆ ಕೆಟ್ಟದಾಗಿ ಮೆಸೇಜ್ ಕಳುಹಿಸಿದ್ದ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದರು. ಪೊಲೀಸರು ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಪೋಸ್ಟ್ ಮಾಡಿದ್ದರು. ಇದು ದರ್ಶನ್ ಅಭಿಮಾನಿಗಳನ್ನು ಕೆರಳಿಸಿತ್ತು. ಆಕೆಯನ್ನು ಮನಸೋಇಚ್ಛೆ ಟ್ರೋಲ್ ಮಾಡಿದ್ದರು. ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಸಾಲದಕ್ಕೆ ಇನ್ಸ್ಟಾಗ್ರಾಮ್ನಲ್ಲಿ ಆಕೆಗೆ ಕೆಟ್ಟದಾಗಿ ಮೆಸೇಜ್ ಕಳುಹಿಸಿದ್ದರು.
ತಮಗೆ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಮೆಸೇಜ್ ಮಾಡಿದ್ದಾರೆ ಎಂದು ರಮ್ಯಾ ಸ್ಕ್ರೀನ್ಶಾಟ್ ಸಮೇತ ಪೋಸ್ಟ್ ಮಾಡಿದ್ದರು. ಬಳಿಕ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಮಾಡಿದ್ದು ತಪ್ಪು ಎಂದು ರಮ್ಯಾ ಮೊದಲಿನಿಂದಲೂ ಹೇಳುತ್ತಾ ಬರ್ತಿದ್ದಾರೆ. ಬಹಿರಂಗವಾಗಿಯೇ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು.
'ದತ್ತ' ಚಿತ್ರದಲ್ಲಿ ದರ್ಶನ್ ಜೋಡಿಯಾಗಿ ರಮ್ಯಾ ನಟಿಸಿದ್ದರು. ವಿಜಯಲಕ್ಷ್ಮಿ ದರ್ಶನ್ ನನ್ನ ಸ್ನೇಹಿತೆ ಎಂದು ಕೂಡ ರಮ್ಯಾ ಹೇಳಿದ್ದಾರೆ. ಆದರೂ ಈ ಪ್ರಕರಣದಲ್ಲಿ ದರ್ಶನ್ ಮಾಡಿದ್ದು ತಪ್ಪು ಎಂದು ವಾದಿಸುತ್ತಾ ಬಂದಿದ್ದರು. ಅದೇ ರೀತಿ ಇತ್ತೀಚೆಗೆ ಆಕೆ ಮಾಡಿದ್ದ ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾದಾಗ ಅದಕ್ಕೆ ಪ್ರತಿಕ್ರಿಯಿಸಿದ್ದರು. 43 ಇನ್ಸ್ಟಾಗ್ರಾಮ್ ಅಕೌಂಟ್ ಲಿಂಕ್ ಕೊಟ್ಟು ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದರು. ಬಳಿಕ ಕೆಲವರು ರಮ್ಯಾ ಅವರಿಗೆ ಮೆಸೇಜ್ ಮಾಡಿ ಕ್ಷಮೆ ಕೋರಿದ ದೂರು ವಾಪಸ್ ಪಡೆಯುವಂತೆ ಕೇಳಿದ್ದಾಗಿಯೂ ವರದಿಯಾಗಿತ್ತು.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದೇ ದರ್ಶನ್ ಬಂಧನವಾಗಲಿದೆ. ಅಥವಾ ದರ್ಶನ್ ಖುದ್ದಾಗಿ ಕೋರ್ಟ್ ಮುಂದೆ ಶರಣಾಗುವ ಸಾಧ್ಯತೆಯಿದೆ. ಈಗಾಗಲೇ ಪೊಲೀಸರು ಆರ್ಆರ್ ನಗರ ನಿವಾಸ, ಮೈಸೂರು ಫಾರ್ಮ್ಹೌಸ್ ಬಳಿ ತೆರಳಿದ್ದಾರೆ.


Click it and Unblock the Notifications











