ಹುಲಿ ಉಗುರು: ನಟ ಜಗ್ಗೇಶ್ ವಿರುದ್ಧ ದೂರು ಯಾವಾಗ ಎಂದು ನೆಟ್ಟಿಗರ ಪ್ರಶ್ನೆ
ರಾಜ್ಯದಲ್ಲಿ ಈಗ ಹುಲಿ ಉಗುರಿನ ವಿಚಾರ ಭಾರೀ ಸದ್ದು ಮಾಡ್ತಿದೆ. ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಇದರ ಬೆನ್ನಲ್ಲೇ ದರ್ಶನ್ ಹಾಗೂ ವಿನಯ್ ಗುರೂಜಿ ಅವರ ಮೇಲೆ ಹುಲಿ ಉಗುರು ಮತ್ತು ಹುಲಿ ಚರ್ಮ ಬಳಸಿದ ಆರೋಪ ಕೇಳಿಬಂದಿದೆ.
ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ. ಇನ್ನು ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಎಂಬುವವರು ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ಅರಣ್ಯಾಧಿಕಾರಿಗೆ ದೂರು ನೀಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಟ ದರ್ಶನ್ ವಿರುದ್ಧ ದೂರು ದಾಖಲಾಗಿರುವುದು ಭಾರೀ ಚರ್ಚೆ ಹುಟ್ಟಾಕ್ಕಿದೆ.

ಭಾನುವಾರ ರಾತ್ರಿಯಷ್ಟೇ ಬಿಗ್ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅವರನ್ನು ವಶಕ್ಕೆ ಪಡೆಯಲಾಗಿತ್ತು. ರಾತ್ರಿಯಿಡೀ ವಿಚಾರಣೆ ನಡೆಸಿ ಮಧ್ಯಾಹ್ನದ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ವಿಚಾರಣೆ ನಡೆಸಿಸಿ ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಗಾಗಲೇ ಸಂತೋಷ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು ವಿಚಾರಣಾಧೀನ ಕೈದಿ ಸಂಖ್ಯೆ 10935 ನಂಬರ್ ಸಿಕ್ಕಿದೆ.
ಜನಸಾಮಾನ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಆಗ್ರಹಿಸಿದ್ದಾರೆ. "ನಟ ದರ್ಶನ್ ಮತ್ತು ವಿನಯ್ ಗುರೂಜಿ ಅವರನ್ನು ಠಾಣೆಗೆ ಕರೆಸಬೇಕು. ನೀವು ಹೇಗೆ ವರ್ತೂರು ಸಂತೋಷ್ ಅವರನ್ನು ಬಂಧಿಸಿದಿರೋ ಅದೇ ರೀತಿ ಅವರನ್ನು ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಳ್ಳಿ. ಸಾಮಾನ್ಯ ಜನರಿಗೆ ಒಂದು ನ್ಯಾಯ, ದೊಡ್ಡವರಿಗೆ ಒಂದು ನ್ಯಾಯ ಅಂತ ಆಗಬಾರದು. ಕಾನೂನು ಪ್ರಕಾರ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು. ಇದೇ ಕಾರಣಕ್ಕೆ ನಾವು ಅರಣ್ಯಾಧಿಕಾರಿಗಳನ್ನು ಭೇಟಿ ಮಾಡಿ, ದೂರು ನೀಡಿದ್ದೇವೆ. ಅವರು ದೂರು ಸ್ವೀಕರಿಸಿದ್ದಾರೆ" ಎಂದು ಶಿವಕುಮಾರ್ ಹೇಳಿದ್ದಾರೆ.
ನಟ ದರ್ಶನ್ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಟ ಜಗ್ಗೇಶ್ ಕೂಡ ತಮ್ಮ ಕೊರಳಿನಲ್ಲಿ ಹುಲಿ ಉಗುರಿನ ಸರ ಹಾಕಿಕೊಂಡಿದ್ದಾರೆ. ಈ ಬಗ್ಗೆ ಖುದ್ದಾಗಿ ಸ್ವತಃ ಜಗ್ಗೇಶ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಹಾಗಾದರೆ ಜಗ್ಗೇಶ್ ಅವರ ವಿರುದ್ಧ ಕೂಡ ದೂರು ದಾಖಲಿಸಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೇಳುತ್ತಿದ್ದಾರೆ.
ನ್ಯೂಸ್ ಫಸ್ಟ್ ಸುದ್ದಿವಾಹಿನಿಯ ಹಳೇ ಸಂದರ್ಶನದಲ್ಲಿ ನಟ ಜಗ್ಗೇಶ್ "ನನಗೆ 20 ವರ್ಷ ಆದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಹೇಳಿ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು" ಎಂದಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಹಲವರು ಅದೇ ರೀತಿಯ ಲಾಕೆಟ್ ಧರಿಸಿರುವ ಫೋಟೊಗಳು ಹರಿದಾಡ್ತಿದೆ.
ಇನ್ನು ನ್ಯಾಯಾಂಗ ಬಂಧನದಲ್ಲಿರುವ ವರ್ತೂರು ಸಂತೋಷ್ಗೆ ಜಾಮೀನಿಗಾಗಿ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ನಾಳೆ(ಅಕ್ಟೋಬರ್ 25) ಆ ಅರ್ಜಿ ವಿಚಾರಣೆ ನಡೆಯಲಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ವರ್ತೂರು ಸಂತೋಷ್ ಬಂಧನವಾಗಿದ್ದುಆರೋಪ ಸಾಬೀತಾದರೆ ಮೂರರಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಆಗುವ ಸಾಧ್ಯತೆಯಿದೆ. ಇನ್ನು ಸಂತೋಷ್ ಬಿಗ್ಬಾಸ್ ಭವಿಷ್ಯ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.


Click it and Unblock the Notifications











