ರಾಕಿ ಭಾಯ್ 'ಟಾಕ್ಸಿಕ್'ಗಾಗಿ ಮರಗಳ ನಾಶ; ಸ್ಯಾಟಲೈಟ್ ಫೋಟೋ ಸಮೇತ ಕಾನೂನು ಕ್ರಮಕ್ಕೆ ಮುಂದಾದ ಈಶ್ವರ್ ಖಂಡ್ರೆ
'ಕೆಜಿಎಫ್ 2' ಬಳಿಕ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿರುವ 'ಟಾಕ್ಸಿಕ್' ಸಿನಿಮಾ ವಿವಾದಕ್ಕೆ ಸಿಲುಕಿದೆ. ಬೆಂಗಳೂರಿನಲ್ಲಿ ಈಗಾಗಲೇ ಚಿತ್ರೀಕರಣ ಆರಂಭ ಆಗಿತ್ತು. ಸದ್ಯ ಈ ಸಿನಿಮಾದ ಎರಡನೇ ಹಂತವನ್ನು ಮುಂಬೈಗೆ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ. ಇತ್ತೀಚೆಗಷ್ಟೇ ನೀಡಿದ್ದ ಸಂದರ್ಶನದಲ್ಲಿ ಯಶ್ ತಮ್ಮ ಮಹತ್ವಕಾಂಕ್ಷೆಯ ಸಿನಿಮಾ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಸಂಗತಿಯನ್ನು ಹೊರಹಾಕಿದ್ದರು.
ಬೆಂಗಳೂರಿನ ಎಚ್ಎಂಟಿ ಪ್ರದೇಶದಲ್ಲಿ ಬೃಹತ್ ಸೆಟ್ ಅನ್ನು ಹಾಕಿ ಚಿತ್ರೀಕರಣ ಮಾಡಲಾಗಿತ್ತು. ಈ ವೇಳೆ ಅಲ್ಲಿನ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಸೆಟ್ ನಿರ್ಮಾಣ ಮಾಡಿರುವ ಆರೋಪ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಯಶ್ ಸಿನಿಮಾ 'ಟಾಕ್ಸಿಕ್' ಈಗ ಸಂಕಷ್ಟಕ್ಕೆ ಸಿಲುಕಿದೆ.

ಸಿನಿಮಾ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾಕಿ ಹಾನಿಗೊಳಿಸಿದ ವಿಚಾರವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಖುದ್ದಾಗಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದಾರೆ. ಬಳಿಕ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೊಗಳನ್ನು ಹಂಚಿಕೊಂಡು ಈ ಕೃತ್ಯ ಎಸಗಿದವರ ವಿರುದ್ಧ ತಕ್ಷಣವೇ ಕಾನೂನು ಕ್ರಮಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ್ದಾರೆ.
ಯಶ್ ಮೂರು ವರ್ಷಗಳ ಬಳಿಕ ನಟಿಸುತ್ತಿರುವ ಸಿನಿಮಾ ದುಬಾರಿ ಮೊತ್ತದಲ್ಲಿ ನಿರ್ಮಾಣ ಆಗುತ್ತಿದೆ. ಕೆವಿಎನ್ ಪ್ರೊಡಕ್ಷನ್ ಹಾಗೂ ಸ್ವತ: ಯಶ್ ಇಬ್ಬರೂ ಸೇರಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ತಾರೆಯರು ಹಾಗೂ ಬಾಲಿವುಡ್ನ ನಟಿಯರು ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ಆಕ್ಷನ್ ಹೇಳುತ್ತಿದ್ದಾರೆ.
ಈ ಪ್ಯಾನ್ ಇಂಡಿಯಾ ಸಿನಿಮಾಗಾಗಿ 'ಟಾಕ್ಸಿಕ್' ತಂಡ ಎಚ್ಎಂಟಿಗೆ ಸೇರಿದ ಅರಣ್ಯ ಭೂಮಿಯಲ್ಲಿ ಬೃಹತ್ ಸೆಟ್ಟನ್ನು ಹಾಕಿರುವ ಆರೋಪ ಎದುರಿಸುತ್ತಿದ್ದಾರೆ. ಸುಮಾರು 20 ಎಕರೆ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಸೆಟ್ ಅನ್ನು ನಿರ್ಮಾಣ ಮಾಡಲಾಗಿದೆ ಎಂದು ವಿವಾದ ಸೃಷ್ಟಿಯಾಗಿತ್ತು. ಸಿನಿಮಾ ಚಿತ್ರೀಕರಣ ಶುರುವಾದ ಸಂದರ್ಭದಲ್ಲಿ ಜಿ. ಬಾಲಾಜಿ ನಾಯ್ಡು ಎಂಬುವವರು ಕರ್ನಾಟಕ ಹೈಕೋರ್ಟ್ ದೂರನ್ನು ಸಲ್ಲಿಸಿದ್ದರು.
ಈ ದೂರಿನ ಅನ್ವಯ ಹೈಕೋರ್ಟ್ 'ಟಾಕ್ಸಿಕ್' ನಿರ್ಮಾಣ ಮಾಡುತ್ತಿರುವ ಕೆವಿಎನ್ ಪ್ರೊಡಕ್ಷನ್ ಹಾಗೂ ಎಚ್ಎಂಟಿ ಸಂಸ್ಥೆಗೆ ದೂರನ್ನು ನೀಡಲಾಗಿತ್ತು. ಈಗ ಅರಣ್ಯ ಸಚಿವರಾಗಿರುವ ಈಶ್ವರ್ ಖಂಡ್ರೆ ಕೂಡ ಆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಈ ಮೂಲಕ ಸಿನಿಮಾ ಸೆಟ್ಟಿಗಾಗಿ ನೂರಾರು ಮರಗಳನ್ನು ಕಡಿದಿರುವುದು ಬೆಳಕಿಗೆ ಬಂದಿದೆ. ಇದೇ ವಿಷಯವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಂಬಂಧ ಪಟ್ಟವರಿಗೆ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
"ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ 'ಟಾಕ್ಸಿಕ್' ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡು ಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ." ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸದ್ಯ 'ಟಾಕ್ಸಿಕ್' ಸಿನಿಮಾದ ಎರಡನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾ ದೊಡ್ಡ ತಾರಾಗಣವೇ ನಟಿಸುತ್ತಿದೆ. ಸೌತ್ ಲೇಡಿ ಸೂಪರ್ಸ್ಟಾರ್ ನಯನತಾರಾ, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿಯ ಹೆಸರು ಕೂಡ ಕೇಳಿ ಬಂದಿದೆ. ಸದ್ಯ ಈ ವಿವಾದದ ಬಗ್ಗೆ ಕೆವಿಎನ್ ಸಂಸ್ಥೆ ಇನ್ನೂ ಪ್ರತಿಕ್ರಿಯೆ ನೀಡಬೇಕಿದೆ.


Click it and Unblock the Notifications











