ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ ಯಡಿಯೂರಪ್ಪ
ಕನ್ನಡ ಚಿತ್ರರಂಗದ ಖ್ಯಾತ ನಟ, ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕೆಂಬ ಬಹು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂದು ಆನ್ಲೈನ್ ಮೂಲಕ ಸ್ಮಾರಕ ನಿರ್ಮಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳುವಿನಲ್ಲಿ 5.5 ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಮೇರು ಚಿತ್ರ ಕಲಾವಿದರೊಬ್ಬರಿಗೆ ಈ ಮೂಲಕ ಸರ್ಕಾರ ಗೌರವ ಸಮರ್ಪಣೆ ಮಾಡಿದಂತಾಗಿದೆ.
ವಿಷ್ಣವರ್ಧನ್ ಅವರ ಹುಟ್ಟೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಗಳ ಕೂಗಿಗೆ ಪ್ರತಿಫಲ ಸಿಕ್ಕಂತಾಗಿದೆ. ವಿಷ್ಣು ಅವರ ವಿದ್ಯಾಭ್ಯಾಸ ಸಹ ಮೈಸೂರಿನಲ್ಲಿಯೇ ಆಗಿದ್ದು, ಅವರಿಗೂ ಹಾಗೂ ಮೈಸೂರಿಗೂ ಅವಿನಾಭಾವ ನಂಟಿದೆ.

11 ಕೋಟಿ ರೂಪಾಯಿ ಯೋಜನೆ
ಒಟ್ಟು 11 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, 5.5 ಎಕರೆ ಜಾಗದಲ್ಲಿ 2 ಎಕರೆಯಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ತಲೆ ಎತ್ತಲಿದೆ. ಜೊತೆಗೆ 6 ಅಡಿ ಎತ್ತರದ ವಿಷ್ಣುವರ್ಧನ್ ಅವರ ಪುತ್ಥಳಿಯೂ ತಲೆ ಎತ್ತುತ್ತಿದೆ.

ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಸಹ ಪ್ರಾರಂಭ
ಪುಣೆಯ ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾದ ಶಾಖೆ ಸಹ ಇಲ್ಲಿ ಆರಂಭವಾಗಲಿದ್ದು, ಇದರ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಅಲ್ಲದೆ, ಇಲ್ಲಿ ಮ್ಯೂಸಿಯಂ ಸಹ ನಿರ್ಮಾಣಗೊಳ್ಳುವುದರಿಂದ ವಿಷ್ಣು ಅವರ ನೆನಪುಗಳು ಚಿತ್ರರಸಿಕರ ಕಣ್ಮನ ಸೆಳೆಯಲಿದೆ.

ವಿಷ್ಣುವರ್ಧನ್ ಕುಟುಂಬದವರಿಗೆ ಸಹಕಾರ
ಈ ವಿಚಾರವಾಗಿ ಡಾ. ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಹಾಗೂ ಕುಟುಂಬದವರಿಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
Recommended Video

ಹಲವು ಪ್ರಮುಖರು ಹಾಜರಿದ್ದರು
ಈ ಸರಳ ಸಮಾರಂಬದಲ್ಲಿ ಶಾಸಕ ಜಿ.ಟಿ.ದೇವೆಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ, ಶಾಸಕ ಎಸ್.ಎ.ರಾಮದಾಸ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಇತರರು ಹಾಜರಿದ್ದರು.


Click it and Unblock the Notifications











