ಹುಟ್ಟೂರು ಮಂಡ್ಯದಲ್ಲಿ ನಡೆಯುತ್ತಾ ಅಂಬರೀಶ್ ಅಂತ್ಯಕ್ರಿಯೆ.?
ರೆಬೆಲ್ ಸ್ಟಾರ್ ಅಂಬರೀಶ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ನಿನ್ನೆ (ನವೆಂಬರ್ 24) ವಿಕ್ರಂ ಆಸ್ಪತ್ರೆಗೆ ದಾಖಲಾದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ, ಹೃದಯಾಘಾತದಿಂದ ಅಂಬರೀಶ್ ಇಹಲೋಕ ತ್ಯಜಿಸಿದರು.
ಸದ್ಯಕ್ಕೆ ವಿಕ್ರಂ ಆಸ್ಪತ್ರೆಯಲ್ಲಿ ಇರುವ ಅಂಬರೀಶ್ ಪಾರ್ಥೀವ ಶರೀರ ಇನ್ನೂ ಕೆಲವೇ ಹೊತ್ತಿನಲ್ಲಿ ಅವರ ನಿವಾಸ ತಲುಪಲಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಮ್ ನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ಅಂಬರೀಶ್ ಅಂತ್ಯಕ್ರಿಯೆಯನ್ನ ಬೆಂಗಳೂರಿನಲ್ಲಿ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿದ್ದವಿದ್ದರೂ, ಅಂಬರೀಶ್ ಹುಟ್ಟೂರಾದ ಮಂಡ್ಯದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಇನ್ನೂ ಮಂಡ್ಯದಲ್ಲಿಯೇ ಅಂತ್ಯಸಂಸ್ಕಾರ ಮಾಡಲು ಅಭಿಮಾನಿಗಳು ಕೂಡ ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರಕ್ಕೆ ಬರಲಾಗಿಲ್ಲ.
ಭಾನುವಾರ ತರಾತುರಿಯಲ್ಲಿ ಅಂತ್ಯಕ್ರಿಯೆ ನಡೆಸುವ ಬದಲು ಸೋಮವಾರ ಅಂತ್ಯಕ್ರಿಯೆ ನಡೆಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಡಾ.ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಅಂತಿಮ ಸಂಸ್ಕಾರ ನಡೆಸಲು ಮಾತುಕತೆ ನಡೆದಿದೆ ಎನ್ನಲಾಗಿದೆ.
ಕುಟುಂಬಸ್ಥರು ಹಾಗೂ ಚಿತ್ರರಂಗದವರ ಜೊತೆಗೆ ಮಾತುಕತೆ ನಡೆಸಿ, ಎಲ್ಲರ ಸಮ್ಮತಿ ಪಡೆದು ಅಂತ್ಯಕ್ರಿಯೆ ಸ್ಥಳದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.


Click it and Unblock the Notifications











