ಯಶ್ ಅಭಿಮಾನಿಗಳ ಸಾವು: ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಆದರೆ, ಹುಟ್ಟುಹಬ್ಬದ ಸಂಭ್ರಮದಲ್ಲಿರಬೇಕಾದ ಯಶ್ ಅಭಿಮಾನಿಗಳಿಗೆ ಸೂತಕದ ಛಾಯೆ ಆವರಿಸಿದೆ. ಇದಕ್ಕೆ ಕಾರಣ ನೆಚ್ಚಿನ ನಟನ ಜನ್ಮದಿನದ ಆಚರಣೆಗೆ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ.
ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಬರ್ತ್ಡೇ ಪ್ರಯುಕ್ತ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಯಶ್ ಅಭಿಮಾನಿಗಳು ದುರಂತ ಅಂತ್ಯ ಕಂಡಿದ್ದಾರೆ. ಯುವಕರ ಸಾವಿಗೆ ಯಶ್ ಫ್ಯಾನ್ಸ್ ಮರುಗಿದ್ದಾರೆ. ನಟ ಕೂಡ ಸಂತ್ರಸ್ತರ ಮನೆಗೆ ಭೇಟಿ ನೀಡಲಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.

ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಸೂರಣಗಿ ಗ್ರಾಮದ ಯುವಕರ ಸಾವಿಗೆ ಸಂತಾಪ ಸೂಚಿಸಿರುವ ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್, ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ ಎಂಬುದನ್ನು ತಿಳಿಸಿದ್ದಾರೆ. "ಮೃತ ಯುವಕರು ಕೂಲಿ ಮಾಡಿ ಜೀವನ ನಡೆಸುವ ಬಡ ಕುಟುಂಬದವರಾಗಿದ್ದು, ಸರ್ಕಾರ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದೆ" ಎಂದು ಸಚಿವ ಎಚ್.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.
ಇನ್ನು, ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಘಟನೆ ಬಗ್ಗೆ ನಟ ಯಶ್ ನನ್ನ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಮನೆಗೆ ಅವರು ಭೇಟಿ ನೀಡಲಿದ್ದಾರೆ.ಈ ರೀತಿ ಘಟನೆಗಳು ನಡೆಯದಂತೆ ಯಾವ ಯಾವ ಎಚ್ಚರಿಕೆ ವಹಿಸಬಹುದು ಎಂದು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡುತ್ತೇವೆ" ಎಂದು ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಮೃತರ ಮನೆಗೆ ಯಶ್ ಭೇಟಿ
ತಮ್ಮ ಹುಟ್ಟುಹಬ್ಬ ಆಚರಣೆ ವೇಳೆ ಮೃತಪಟ್ಟ ಸೂರಣಗಿ ಗ್ರಾಮದ ಮುರಳಿ ನಡವಿನಮನಿ (20), ಹನಮಂತ ಹರಿಜನ್ (21), ಹಾಗೂ ನವೀನ್ ಗಾಜಿ(19) ಮನೆಗೆ ನಟ ಭೇಟಿ ನೀಡಲಿದ್ದಾರೆ. ಜನವರಿ 08ರ ಸಂಜೆ 4 ಗಂಟೆಗೆ ನಟ ಯಶ್ ಭೇಟಿ ನೀಡಲಿದ್ದಾರೆ. ಇನ್ನು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರನ್ನು ನಟ ಭೇಟಿಯಾಗಿ ಆರೋಗ್ಯ ವಿಚಾರಿಸುವ ಸಾಧ್ಯತೆಯಿದೆ.


Click it and Unblock the Notifications











