ಯುವ ರಾಜ್ಕುಮಾರ್ ವಿಚ್ಚೇದನ; "ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ" ಎಂದು ಅಮೆರಿಕಗೆ ಹಿಂತಿರುಗಿದ ಶ್ರೀದೇವಿ ಬೈರಪ್ಪ
ದರ್ಶನ್ ಪ್ರಕರಣದ ಜೊತೆಗೆ ಇಂದು (ಜುಲೈ 4) ಯುವರಾಜ್ಕುಮಾರ್ ವಿಚ್ಚೇದನ ಪ್ರಕರಣ ಕೂಡ ವಿಚಾರಣೆ ನಡೆಯಲಿದೆ. ಈ ಕಾರಣಕ್ಕೆ 15 ದಿನಗಳ ಹಿಂದೇನೆ ಶ್ರೀದೇವಿ ಬೈರಪ್ಪ ಅಮೆರಿಕದಿಂದ ಭಾರತಕ್ಕೆ ಹಿಂತಿರುಗಿದ್ದಾರೆ. ವಿಚಾರಣೆ ಸಮಯದಲ್ಲಿ ಶ್ರೀದೇವಿ ಬೈರಪ್ಪ ತನ್ನ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ತನಗೆ ಬೆಂಬಲವಾಗಿ ನಿಂತಿದ್ದವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಈ ಪೋಸ್ಟ್ನಲ್ಲಿ ಕಳೆದ ಏಳು ತಿಂಗಳು ನೋವು ಹಾಗೂ ಆಘಾತದಿಂದ ಕೂಡಿತ್ತು ಎಂದು ಶ್ರೀದೇವಿ ಹೇಳಿಕೊಂಡಿದ್ದಾರೆ. ಹಾಗೇ ಈ ಬಾರಿ ಕೂಡ ಸತ್ಯ ಹಾಗೂ ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಂಬಿರುವುದಾಗಿ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಬೈರಪ್ಪ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಹಾರ್ವರ್ಡ್ನಲ್ಲಿ ಶೈಕ್ಷಣಿಕ ಅಭ್ಯಾಸ ಮುಂದುವರೆಸಬೇಕಿರುವುದರಿಂದ ಮತ್ತೆ ಅಮೆರಿಕಗೆ ಹಿಂತಿಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಶ್ರೀದೇವಿ ಬೈರಪ್ಪ ಶೇರ್ ಮಾಡಿಕೊಂಡಿರುವ ಸುದೀರ್ಘ ಪೋಸ್ಟ್ ಇಲ್ಲಿದೆ.

"ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಯಾಂತರಳಾದಿಂದ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ.
ಕಳೆದ ದಶಕಗಳಿಂದ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರಾ ದುರಾದೃಷ್ಟಕರ. ಆದರೂ ಸಹ, ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಸ್ಥೈರ್ಯಕ್ಕೆ ಸಹಕಾರಕ್ಕೆ ನಾನು ಅಭಾರಿಯಾಗಿದ್ದೇನೆ.

ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ. ಕಳೆದ ಏಳು ತಿಂಗಳು ತೀವ್ರ ಒತ್ತಡ ಹಾಗೂ ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ಧ್ವನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದು:ಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ. ಹಾಗೂ ಅದಕ್ಕಾಗಿ ನಾನು ಹೋರಾಡುತ್ತೇನೆ ಎಂದು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.
ಹಾರ್ವರ್ಡ್ನಲ್ಲಿ ನಾನು ಒಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರೆಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂತಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರೆಸುತ್ತೇನೆ. ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ" ಎಂದು ಈ ಪೋಸ್ಟ್ ಅನ್ನು ಶ್ರೀದೇವಿ ಬೈರಪ್ಪ ಹೇಳಿಕೊಂಡಿದ್ದಾರೆ.


Click it and Unblock the Notifications











