ಸನಾತನ ಧರ್ಮವನ್ನು ಡೆಂಘೀ, ಮಲೇರಿಯಾ ಹೋಲಿಕೆ: ನಟ ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನೋಟಿಸ್
ತಮಿಳು ನಟ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಯಿಂದ ವಿವಾದಕ್ಕೂ ಸಿಲುಕಿದ್ದರು. ಈ ಸಂಬಂಧ ದೇಶದ ಹಲವೆಡೆ ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಈ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ಗೆ ಇಂದು (ಸೆಪ್ಟೆಂಬರ್ 22) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸನಾತನ ಧರ್ಮದ ವಿರುದ್ಧ ತಮಿಳುನಾಡು ಸಚಿವ-ನಟ ಉದಯನಿಧಿ ಸ್ಟಾಲಿನ್ ಹಾಗೂ ಮಾಜಿ ಕೇಂದ್ರ ಸಚಿವ ಎ ರಾಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮಿಳುನಾಡಿನ ವಕೀಲ ಬಿ ಜಗನ್ನಾಥ್ ಎಂಬುವವರು ಇವರಿಬ್ಬರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಟ ಉದಯನಿಧಿ ಸ್ಟಾಲಿನ್ ಹಾಗೂ ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಕೊಟ್ಟಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ್ ಬೋಸ್ ಹಾಗೂ ಬೆಲ ಎಂ ತ್ರಿವೇದಿಯವರನ್ನು ಒಳಗೊಂಡ ಪೀಠ ಈ ನೋಟಿಸ್ ಅನ್ನು ಜಾರಿ ಮಾಡಿದೆ. ಚೆನ್ನೈನ ವಕೀಲ ಬಿ ಜಗನ್ನಾಥ್ ಇವರಿಬ್ಬರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅರ್ಜಿಯನ್ನು ಸಲ್ಲಿಸಿದ್ದರು. ಇದರಲ್ಲಿ ಸಚಿವ ಹೇಳಿಕೆ ದ್ವೇಷದಿಂದ ಕೂಡಿದೆ ಎಂದು ಹೇಳಲಾಗಿದೆ.
ಇದೇ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದಾಮ ಶೇಷಾದ್ರಿ ನಾಯ್ಡು ಸಚಿವ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆ ಮೂಲಕ ಶಾಲಾ ವಿದ್ಯಾರ್ಥಿಗಳ ಒಂದು ಗುಂಪು ಧರ್ಮವು ಪ್ರತಿಕೂಲವಾಗಿದೆ ಎಂದೂ ಇನ್ನೊಂದು ಗುಂಪು ಧರ್ಮವು ಅನಾನುಕೂಲ ಎಂದು ವ್ಯಕ್ತಪಡಿಸಲು ಪ್ರೋತ್ಸಾಹಿಸಿದ್ದಾರೆ ಎಂದು ಆರೋಪಿಸಿದ್ದರು.

ಕೆಲವು ದಿನಗಳ ಹಿಂದೆ ಉದಯನಿಧಿ ಸ್ಟಾಲಿನ್ ಪ್ರಗತಿಪರ ಲೇಖಕರು ಹಾಗೂ ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದರು. "ಕೆಲವು ವಿಚಾರಗಳನ್ನು ವಿರೋಧಿಸಿದರೆ ಸಾಲೋದಿಲ್ಲ. ಅದನ್ನು ಸಂಪೂರ್ಣವಾಗಿ ಬುಡ ಸಮೇತ ಕಿತ್ತೆಸೆಯಬೇಕಾಗುತ್ತದೆ. ಡೆಂಘೀ, ಮಲೇರಿಯಾ, ಕೊರೊನಾ, ಸೊಳ್ಳೆಗಳನ್ನೆಲ್ಲಾ ವಿರೋಧಿಸೋಕೆ ಆಗೋದಿಲ್ಲ. ಅವುಗಳನ್ನು ನಿರ್ನಾಮಗೊಳಿಸಬೇಕು. ಇದೇ ರೀತಿ ಸನಾತನವನ್ನೂ ಶಾಶ್ವತವಾಗಿ ನಿರ್ಮೂಲನೆ ಮಾಡಬೇಕು." ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು.
ಈ ಹೇಳಿಕೆ ವಿವಾದಕ್ಕೆ ತಿರುಗಿದ ಬಳಿಕವೂ ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ತಮಿಳುನಾಡು ಸಚಿವ ಹಾಗೂ ನಟ ಉದಯನಿಧಿ ಸ್ಟಾಲಿನ್ ಮತ್ತೆ ಹೇಳಿಕೆ ಕೊಟ್ಟಿದ್ದರು. ಇದು ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು.


Click it and Unblock the Notifications











