ಕಲರ್ಸ್ ಕನ್ನಡ ಮುಖ್ಯಸ್ಥ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಪರಮೇಶ್ವರ್ ಗುಂಡ್ಕಲ್ಗೆ ಸಿಕ್ತಿದೆ ಹೊಸ ಜವಾಬ್ದಾರಿ
ಕನ್ನಡ ಕಿರುತೆರೆಯ ಕಲರ್ಸ್ ಕನ್ನಡ ಮುಖ್ಯಸ್ಥ ಸ್ಥಾನಕ್ಕೆ ಇತ್ತೀಚೆಗೆ ಪರಮೇಶ್ವರ್ ಗುಂಡ್ಕಲ್ ಗುಡ್ಬೈ ಹೇಳಿದ್ದರು. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪತ್ರ ಬರೆದುಕೊಂಡಿದ್ದರು. ಕನ್ನಡದ ಜನಪ್ರಿಯ ಮನರಂಜನ ವಾಹಿನಿಯಿಂದ ಹೀಗೆ ಪರಂ ಹೊರ ಬಂದಿದ್ದು ಕೆಲವರಿಗೆ ಅಚ್ಚರಿ ಮೂಡಿಸಿತ್ತು. ಇದಕ್ಕೆ ಕಾರಣ ಏನು? ಮುಂದೇನು ಮಾಡುತ್ತಾರೆ? ಅನ್ನುವ ಬಗ್ಗೆ ಚರ್ಚೆ ಶುರುವಾಗಿತ್ತು.
ಕಳೆದ 10 ವರ್ಷಗಳಲ್ಲಿ ಕಲರ್ಸ್ ಕನ್ನಡ ವಾಹಿನಿ ವಿವಿಧ ಬಗೆಯ ವಿನೂತನ ಕಾರ್ಯಕ್ರಮಗಳಿಂದ ಜನಮನ ಗೆದ್ದಿದೆ. ಬಹಳ ದಿನಗಳ ಕಾಲ ನಂಬರ್ ಒನ್ ಸ್ಥಾನದಲ್ಲಿತ್ತು. ಇದಕ್ಕೆ ಪರಂ ಕೊಡುಗೆಯೂ ಇದೆ. ತಮ್ಮ ವಿಭಿನ್ನ ಆಲೋಚನೆಗಳಿಂದ ಹತ್ತು ಹಲವು ಪ್ರಯೋಗಗಳ ಮೂಲಕ ವೀಕ್ಷಕರನ್ನು ಸೆಳೆಯುವಂತಹ ಕಾರ್ಯಕ್ರಮಗಳು ನಿರ್ಮಾಣವಾಗಲು ವಾಹಿನಿಯಲ್ಲಿ ಶ್ರಮಿಸಿದ್ದರು. ಅದರಲ್ಲಿ ಯಶಸ್ವಿ ಕೂಡ ಆಗಿದ್ದರು. ಇದೆಲ್ಲದರ ನಡುವೆಯೂ ಪರಂ ಯಾಕೆ ಕಲರ್ಸ್ ಕನ್ನಡ ವಾಹಿನಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದರು ಅಂದರೆ ಕಾರಣ ಜೀ ಸ್ಟುಡಿಯೋಸ್ ಎನ್ನಲಾಗ್ತಿದೆ.

ಹೌದು ಪರಮೇಶ್ವರ್ ಗುಂಡ್ಕಲ್ ಜಿಯೋ ಸ್ಟುಡಿಯೋಸ್ ಕನ್ನಡ ಬ್ಯುಸಿನೆಸ್ ಹೆಡ್ ಸ್ಥಾನವನ್ನು ಅಲಂಕರಿಸುತ್ತಾರೆ ಎನ್ನಲಾಗ್ತಿದೆ. ಕಲರ್ಸ್ ಕನ್ನಡ ವಾಹಿನಿಯಿಂದ ಹೊರ ಬಂದಿರುವ ಅವರು ಅದರ ಮಾತೃಸಂಸ್ಥೆಯ ಮತ್ತೊಂದು ವಿಭಾಗದ ಮುಖ್ಯಸ್ಥರಾಗಿ ಹೋಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ. ಜಿಯೋ ಸ್ಟುಡಿಯೋಸ್ ಸಂಸ್ಥೆ ಕನ್ನಡದಲ್ಲಿ ಸಿನಿಮಾ, ವೆಬ್ಸೀರಿಸ್ಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ. ಇದಕ್ಕಾಗಿ ಒಬ್ಬ ನಾಯಕನನ್ನು ಹುಡುಕುತ್ತಿತ್ತು. ಹಾಗಾಗಿ ತಮ್ಮದೇ ಸಂಸ್ಥೆಯ ಮತ್ತೊಂದು ವಿಭಾಗದಲ್ಲಿದ್ದ ಪರಮೇಶ್ವರ್ ಗುಂಡ್ಕಲ್ ಅವರನ್ನು ಈ ಸ್ಥಾನಕ್ಕೆ ನೇಮಿಸಿದೆ ಎನ್ನಲಾಗ್ತಿದೆ.
ಮೊದಲನೇ ಸಲ ಕರೆಂಟ್ ಬಂದ ಒಂದು ಮಳೆಗಾಲದ ಸಂಜೆ ಅಕ್ಕನ ಜೊತೆ ಸೇರಿ ಬರೀ ಸ್ವಿಚ್ ಒತ್ತಿ ಲೈಟ್ ಆನ್ ಮಾಡುವುದು ಮತ್ತು ಆಫ್ ಮಾಡುವುದನ್ನೇ ಮಾಡುತ್ತಾ ಗಂಟೆಗಟ್ಟಲೇ ಕುಣಿದಾಡಿದ್ದು ನಿನ್ನೆ ಮೊನ್ನೆ ಆದ ಹಾಗೆ ನೆನಪಿದೆ. ಕಾರಣವಿಲ್ಲದೇ ಲೈಟ್ ಆನ್ ಮತ್ತು ಆಫ್ ಮಾಡುವುದೇ ನಮಗೆ ಸುಮಾರು ದಿನಗಳ ಕಾಲ ಎಂಟರ್ಟೈನ್ಮೆಂಟ್ ಆಗಿತ್ತು."
"ಈ ಟಿವಿಯಂಥ ಎಂಟರ್ಟೈನ್ಮೆಂಟ್ ವಾಹಿನಿಗಳು ಕನ್ನಡದಲ್ಲಿ ಕತೆಗಳನ್ನು ಹೇಳತೊಡಗಿದಾಗ ನಮ್ಮನೆಗೆ ಕಲರ್ ಟಿವಿ ಬಿಡಿ, ಇನ್ನೂ ಟಿವಿಯೇ ಬಂದಿರಲಿಲ್ಲ. ಗದ್ದೆ, ತೋಟಗಳಲ್ಲಿ ಕೆಲಸ ಮಾಡುತ್ತ, ದನ, ಕರು ಮೇಯಿಸುತ್ತಾ ಅಲೆದಾಡುತ್ತಿರುವಾಗ ನಾಲ್ಕು ಬ್ಯಾಂಡಿನ ರೇಡಿಯೋದಲ್ಲಿ ಧ್ವನಿ ಕೇಳಿಸಿಕೊಳ್ಳುತ್ತಾ ಕಲರ್ ಕಲರ್ ಚಿತ್ರಗಳನ್ನು ಕಣ್ಮುಂದೆ ತಂದುಕೊಳ್ಳುತ್ತಾ ಯಾವತ್ತಾದರೂ ಒಂದು ದಿನ ಕತೆ ಹೇಳಬೇಕೆಂದು ಕಾತರಿಸುತ್ತಿದ್ದ ಟೈಮ್ ಅದು. ಆ ಅವಕಾಶ ಮೊದಲು ಸಿಕ್ಕಿದ್ದು ಕನ್ನಡ ಪತ್ರಿಕೆಗಳಲ್ಲಿ. ನಂತರ ಸಿಕ್ಕಿದ್ದು ಟಿವಿಯಲ್ಲಿ. ಟೆಲಿವಿಷನ್ ಸೇರಿಕೊಂಡ ಮೊದಮೊದಲು ತುಂಬಾ ಬೆರಗು ಹುಟ್ಟಿಸಿದ್ದ ಕಂಪನಿ ವಯಾಕಾಮ್18. ಸರಿಯಾದ ಟೈಮಲ್ಲಿ ಸರಿಯಾದ ಜಾಗದಲ್ಲಿ ಇದ್ದಿದ್ದರಿಂದಲೋ ಏನೋ. ಒಂದು ದಿನ ಅದೇ ಕಂಪನಿಯ ಕಲರ್ಸ್ ಚಾನೆಲ್ಲನ್ನು ಕನ್ನಡದಲ್ಲಿ ರೂಪಿಸುವ ಅವಕಾಶ ಸಿಕ್ಕಿಬಿಟ್ಟದ್ದು ಮಾತ್ರ ಬಹುಶಃ ಅದೃಷ್ಟ. ಅಷ್ಟೇ ಅನಿರೀಕ್ಷಿತ."

"ಒಟ್ಟಾರೆ ಹತ್ತೂವರೆ ವರ್ಷ. ಅಗ್ನಿಸಾಕ್ಷಿ, ಲಕ್ಷ್ಮೀ ಬಾರಮ್ಮ, ರಾಧಾರಮಣ, ಕನ್ನಡತಿ ಥರದ ಕತೆಗಳು, ಬಿಗ್ ಬಾಸ್, ಡಾನ್ಸಿಂಗ್ ಸ್ಟಾರ್, ಸೂಪರ್ ಮಿನಿಟ್, ಕನ್ನಡದ ಕೋಟ್ಯಧಿಪತಿ, ಅನುಬಂಧ ಥರದ ಒಂದಿಷ್ಟು ಶೋಗಳು. ರಿಬ್ರಾಂಡಿಂಗ್, ಎಚ್ ಡಿ ಚಾನೆಲ್, ಎರಡನೇ ಚಾನೆಲ್, ಸಿನಿಮಾ ಚಾನೆಲ್, ವೂಟ್ ಹೀಗೆ ಒಂದೊಂದೂ ಕಲರ್ ಕಲರ್ ಅನುಭವ. ಗೆದ್ದ ಖುಷಿ, ಸೋತ ನೋವು, ತಪ್ಪು ಮಾಡಿ ಕಲಿತ ಪಾಠ, ಅಕಾರಣವಾಗಿ ಸಿಕ್ಕಿದ ಮೆಚ್ಚುಗೆ, ಸಕಾರಣವಾಗಿ ಆದ ಟೀಕೆ ಮತ್ತು ಅವಮಾನ, ಕತೆ ಹುಟ್ಟಿ ಸಂಭ್ರಮಿಸಿದ ದಿನಗಳು, ಕತೆ ಹುಟ್ಟದೇ ಗೊಂದಲಗೊಂಡ ಕ್ಷಣಗಳು, ದಾರಿಯಲ್ಲಿ ಸಿಕ್ಕಿದ ನಕ್ಷತ್ರಗಳು, ಹೆಕ್ಕಿಕೊಂಡ ಭಾವನೆಗಳೆಲ್ಲ ಸೇರಿ ತಿರುಗಿ ನೋಡಿದಾಗ ಸಿಕ್ಕಾಪಟ್ಟೆ ಸಮಾಧಾನ. ಸಂತೃಪ್ತಿ. ಹತ್ತೂವರೆ ವರ್ಷಗಳಲ್ಲಿ ಏನೇನೋ ಆಯಿತು. ಆಗಿದ್ದೆಲ್ಲಾ ಒಳ್ಳೆಯದಕ್ಕೇ ಆಯಿತು!"
"ತೀವ್ರವಾಗಿ ಮತ್ತು ಪ್ರಾಮಾಣಿಕವಾಗಿ ಕನಸು ಕಂಡರೆ ಸಾಕು. ಸ್ವಲ್ಪ ಮನಸ್ಸಿಟ್ಟು ಚೂರು ಪಾರು ಇಷ್ಟಪಟ್ಟು ಕೆಲಸ ಮಾಡಿದರೆ ಸಾಕು. ಯಾವ ನಕ್ಷತ್ರವಾದರೂ ಸಿಕ್ಕುತ್ತದೆ!
ಮಿಲ್ಲರ್ಸ್ ರೋಡಿನ ಐದನೇ ಫ್ಲೋರಿನ ಆಫೀಸಿನಲ್ಲಿ ಕುಡಿದ ಚಹಾ ಕಪ್ಪುಗಳ ಲೆಕ್ಕ ಗೊತ್ತಿಲ್ಲ. ಅಷ್ಟೆಲ್ಲಾ ಚಹಾ ಕುಡಿದರೂ ಇನ್ನಷ್ಟು ಕುಡಿಯುವ ಆಸೆ ಇದ್ದೇ ಇದೆ. ಸಿಕ್ಕಿದ ಒಬ್ಬೊಬ್ಬ ವ್ಯಕ್ತಿಯನ್ನೂ ಇನ್ನೊಂದು ಸಲ ಮಾತಾಡಿಸುವ ಮನಸ್ಸಾಗುತ್ತದೆ. ಹೇಳಿದ ಕತೆಗಳನ್ನು ಇನ್ನೊಂದು ಸಲ ಚೂರು ಸರಿಮಾಡಿಕೊಂಡು ಹೇಳಿಬಿಡೋಣ ಎಂಬ ಕನಸು ಬೀಳುತ್ತದೆ."
"ಇವತ್ತು ಬೆಳಿಗ್ಗೆಯಿಂದ ಟಿವಿ ಕೆಲಸ ಇಲ್ಲ ಎಂದು ಯೋಚಿಸಿ ಮನಸ್ಸು ಒದ್ದೆಯಾಗಿದೆ. ಒಳ್ಳೇದು ಮಾತ್ರ ಆಗಲಿ ಅಂತ ಹಾರೈಸಬೇಡಿ. ಒಳ್ಳೆಯದು, ಕೆಟ್ಟದ್ದು, ಖುಷಿ, ದುಃಖ, ಗೆಲುವು, ಸೋಲು, ಅಸೂಯೆ, ಸಂಕಟ, ಪ್ರೀತಿ, ಆಘಾತ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಕಲಿಕೆ ಹೀಗೆ ಎಲ್ಲವೂ ಆಗಲಿ ಎಂದು ಹೇಳಿ. ಜೀವನವೇ ಆಗಲಿ ಎಂದು ಹಾರೈಸಿ. ಥ್ಯಾಂಕ್ಯೂ ವಯಾಕಾಮ್18. ಥ್ಯಾಂಕ್ಯೂ ಕಲರ್ಸ್ ಕನ್ನಡ. ಹೋಗಿ ಬರುವೆ. ನಮಸ್ಕಾರ!"


Click it and Unblock the Notifications











